ಮಳೆ ಮತ್ತು ಪ್ರೀತಿ!

Posted: ನವೆಂಬರ್ 18, 2012 in ಕತೆ, ಕಥಾ ವಿಚಾರ, ಲಹರಿ

ಅಪ್ಪನ ಬೈಗುಳ ನನಗೆ ಸ್ಪಷ್ಟವಾಗಿ ಕೇಳಿಸುತ್ತಿತ್ತು. ಕಾರಣ ಚಿಕ್ಕದು, ಅಕ್ಕನಿಂದ ಪತ್ರ ಬಂದಿತ್ತು ಅಕ್ಕನೆಂದರೆ ನನ್ನ ಪಾಲಿಗಂತೂ ದೊಡ್ಡ ಧೈರ್ಯಸ್ಥೆ! ಅಷ್ಟುವರ್ಷ ಪ್ರೀತಿಯಿಂದ ಸಾಕಿದ ಅಪ್ಪನನ್ನು ಧಿಕ್ಕರಿಸಿ ಯಾವುದೋ ಹುಡುಗನ ಪ್ರೀತಿಯ ಮಾಯಾಮೃಗಕ್ಕೆ ಆಸೆಪಟ್ಟು, ಕಟ್ಟು ಪಾಡಿನ ಲಕ್ಷಣ ರೇಖೆಯನ್ನು ದಾಟಿದವಳು. ಸದಾ ಮುಗುದೆಯಂತೆ ಮಾಡುತ್ತಿದ್ದ ಅಕ್ಕನಿಗೆ ಅಂತಹ ಮಾನಸಿಕ ಶಕ್ತಿಯನ್ನು ನೀಡಿದ ಮಹಾನ್ ಶಕ್ತಿ ಪ್ರೇಮವೆಂದು ಅಚ್ಚರಿಪಟ್ಟಿದ್ದೆ!

ಅಪ್ಪನ ಕೋಪಕ್ಕೆ ತಲೆಕೆಡಿಸಿಕೊಳ್ಳದೆ ’ಆದದ್ದು ಆಗಿ ಹೋಯಿತು, ಇನ್ನಾದರು ಒಟ್ಟಿಗೆ ಇರೋಣ….’ ಎಂಬ ಸಂಧಾನ ಪತ್ರ ಆಗಾಗ್ಗೆ ಕಳುಹಿಸುತ್ತಲೇ ಇರುತ್ತಾಳೆ. ಈ ಪತ್ರಗಳ ಬಿಸಿಗೆ ಅಪ್ಪನ ಕೋಪದ ಮಂಜುಗಡ್ಡೆ ಇನ್ನು ಕರಗಲೇ ಇಲ್ಲ. ಮತ್ತೆ ಇನ್ನೊಂದು ಪತ್ರ ಹಾಕಿದ್ದಳು.

ಅವಳಿಗಾಗಲೇ ಈ ಬೈಗುಳ. ನನಗೆ ಯಾಕೋ ಕಸಿವಿಸಿ, ಅವರು ಬೈದ ಮಾತುಗಳು ನನಗೂ ತಾಗುತ್ತಿದ್ದವು. ಪ್ರೇಮವೆಂದೊಡನೆ ಎಲ್ಲರ ಮನೆಗಳಲ್ಲಿಯೂ ತಂದೆ ತಾಯಿಗಳ ಮಾಮೂಲಿ ಮಾತುಗಳಿರಬಹುದು ಆದರೆ ನಿಜವಾದ ಪ್ರೀತಿಯಲ್ಲಿ ತೋಯ್ದಿರುವ ನನ್ನಂತವಳಿಗೆ ಇದು ಚುಚ್ಚುವ ಈಟಿಯಂತದ್ದು. ಅಸಲು ದೊಡ್ಡವರಿಗೆ ಪ್ರೀತಿಯ ಮೇಲಿಷ್ಟು ದ್ವೇಷ ಯಾಕೆ ಅಂತ ಅರ್ಥವಾಗುವುದಿಲ್ಲ. ಹರೆಯದ ವಯಸ್ಸಿನಲ್ಲಿ ಅವರೂ ಪ್ರೇಮಿಸಿರಲಿಲ್ಲವೇ? ಪ್ರೇಮದ ಗಾಢತೆ, ಅದರ ಸವಿಸ್ಪರ್ಶ ಅವರೂ ಅನುಭವಿಸಿರಲಿಲ್ಲವೇ? ಆದರೂ ಇದನ್ನೆಲ್ಲ ಧೈರ್ಯವಾಗಿ ನಿರ್ಭಯತೆಯಿಂದ ತಂದೆಯೆದುರು ಹೇಳುವಂತಹ ಅಕ್ಕನ ಧೈರ್ಯ ಧಿಮಾಕು ನನ್ನ ಬಳಿ ಇಲ್ಲ. ಆ ಭಯ ನಿಜಕ್ಕೂ ಧೈರ್ಯವಿಲ್ಲದೆಯಷ್ಟೇ ಅಲ್ಲ, ಇಷ್ಟು ದಿನ ತಂದೆ ತೋರಿದ ಪ್ರೀತಿಯೆ ಅಂತಹ ಮಾತಾಡದಂತೆ ಕಟ್ಟಿಹಾಕಿರುವುದು.

ಹೌದು…. ತಂದೆಗೆ ನನ್ನ ಮೇಲೆ ಅಗಾಧ ಪ್ರೀತಿ. ಅಕ್ಕ ಹೋದ ಮೇಲಂತೂ ಅವರಿಗೆ ನನ್ನ ಮೇಲೆ ಪ್ರೀತಿ ಇಮ್ಮಡಿಯಾಗಿದೆ. ಯಾವ ವಿಷಯಕ್ಕೂ ನನ್ನ ನಿರ್ಧಾರಕ್ಕೆ ಅಡ್ಡಿ ಬರುವವರಲ್ಲ ಅಲ್ಲದೇ ಜಬ್ದಾರಿಯಿಂದ ಬೆಳೆಸಿದ್ದರು. ಆದರೆ ಮದುವೆ ವಿಷಯಕ್ಕೆ ಬಂದರೆ
ಮಾತ್ರ ನನಗೆ ನಿರ್ಣಯದ ಸ್ವಾತಂತ್ರ್ಯ ನೀಡುವುದು ಅನುಮಾನವೇ! ಅದಕ್ಕೆ ಕಾರಣವನ್ನೂ ಆಗಾಗ್ಗೆ ಹೇಳುತ್ತಿರುತ್ತಾರೆ. ‘ಹರೆಯಕ್ಕೆ ಬಂದವರ ಕಣ್ಣು ಕುರುಡಂತೆ’. ಆದರೆ ನನಗೆ ಈ ಅಭಿಪ್ರಾಯದ ಬಗ್ಗೆ ಕೊಂಚವೂ ನಂಬಿಕೆ, ಒಪ್ಪಿಗೆಯಿಲ್ಲ.

ಪಕ್ಕದಲ್ಲೇ ಬಿದ್ದಿದ್ದ ಎಕನಾಮಿಕ್ಸ್ ಪುಸ್ತಕದ ಮಧ್ಯಭಾಗದಲ್ಲಿ ಬಚ್ಚಿಟ್ಟಿದ್ದ ಅವನ ಫೋಟೊ ಕೈಗೆತ್ತಿಕೊಂಡೆ. ಅವನ ತುಟಿಯಂಚಿನ ಮುಗ್ಧ ನಗು ಸೂಜಿಗಲ್ಲಂತೆ ಸೆಳೆಯುತ್ತಿತ್ತು. ಕಣ್ಣ ಹೊಳಪು, ಆಕರ್ಷಣೆಗೆ ಮನ ತಲೆಬಾಗಿತ್ತು. ನಿಜವಾಗಿಯೂ ಹೇಳೆಬೇಕೆಂದರೆ ಆತನ ಸೌಂದರ್ಯವನ್ನು ಇಷ್ಟಪಟ್ಟು ಪ್ರೇಮಿಸಿದ್ದಲ್ಲ. ಸೌಂದರ್ಯಕ್ಕೆ ಮೀರಿದ ರಹಸ್ಯವೇನೋ ಆತನಲ್ಲಿದೆ. ಅದು ಆತನ ನಡೆ, ಮಾತು, ನಗು, ದಿರಿಸು ಏನೂ ಆಗಿರಬಹುದು. ಒಟ್ಟಿನಲ್ಲಿ ಆತನೆಂದರೆ ನಂಗಿಷ್ಟ.

ಆದರೆ ಇವತ್ತಿಗೂ ಚಿಕ್ಕ ಅನುಮಾನದ ಮೊಳಕೆ ಎದೆಯ ಭೂಮಿಯಲ್ಲಿ ಇದ್ದೇ ಇದೆ. ಅದೇನೆಂದರೆ, ಆತನೊಳಗೆ ನನ್ನ ಬಗ್ಗೆ ಪ್ರೇಮದ ಭಾವನೆ ಇದೆಯಾ ಎಂದು. ಯಾಕೆಂದರೆ ಯಾವತ್ತೂ ಅದನ್ನು ಅವನ ಬಳಿ ಕೇಳಿಲ್ಲ. ನನ್ನ ಇಂಟ್ರಾವರ್ಟ್ ಮನಸತ್ವಕ್ಕೆ ಅದು ಸಾಧ್ಯವಾಗುತ್ತದಾ ಇಲ್ಲವಾ ಎಂಬ ಭಯ ನನ್ನಲ್ಲಿದೆ. ಅವನು ಮೊದಲು ಭೇಟಿಯಾದಾಗಿನಿಂದ ಇಲ್ಲಿಯವರೆಗೂ ಒಮ್ಮೆ ಅದೂ ಕಾಲೇಜ್ ಡೇ ದಿನದ ಫೋಟೊ ಆಲ್ಬಮ್‌ನಿಂದ ಆತನ ಫೋಟೊ ಕದ್ದಿದ್ದನ್ನು ಬಿಟ್ಟರೆ, ಪ್ರೇಮ ನಿವೇದನೆಯ ಪ್ರಯತ್ನವಾಗಲೀ, ಲೆಟರ್ ಮೂಲಕ ಹೇಳುವ ಧೈರ್ಯವಂತ ನಿರ್ಧಾರವಾಗಲೀ ಮಾಡಿದ ನೆನಪಿಲ್ಲ. ಆದರೆ ಆತ ನನ್ನೆಡೆಗೆ ನೋಡುವ ನೋಟದಲ್ಲಿನ ಚಿಲುಮೆ, ನೀಡುವ ಗೌರವ, ಯಾವತ್ತೂ ನನ್ನ ಹೃದಯದಲ್ಲಿ ‘ಅವನೂ ಪ್ರೀತಿಸುತ್ತಿದ್ದಾನೆ’ ಎಂಬ ಮಾತು ಮಾರ್ದವಗೊಳ್ಳುವಂತೆ ಮಾಡುತ್ತಿರುತ್ತದೆ.

ಕ್ಲಾಸಿನಲ್ಲಿ ಕೆಲವೊಮ್ಮೆ ಆತನನ್ನು ಗಮನಿಸುತ್ತಿರುತ್ತೇನೆ. ಯಾರ ಬಳಿಯೂ ಹೆಚ್ಚು ಮಾತಿಲ್ಲ. ಅವನಾಯಿತು. ಓದಾಯಿತು ಎಂಬಂತಿರುತ್ತಾನೆ. ನನ್ನಂತೆಯೇ ಶುದ್ಧ ಇಂಟ್ರಾವರ್ಟ್ ಇರಬೇಕು. ಅವನೊಳಗಿರುವ ನನ್ನ ಬಗೆಗಿನ ಪ್ರೇಮವನ್ನು ತೋಡಿಕೊಳ್ಳಲು ಅದೇ ಅಡ್ಡಿ ಬರುತ್ತದೆ ಅಂದುಕೊಂಡು ವಿಲಪಿಸುವ ಹೃದಯಕ್ಕೆ ಸಮಾಧಾನ ಹೇಳುತ್ತಿರುತ್ತದೆ.

ಅವನನ್ನು ಭೇಟಿ ಮಾಡಿದ ಕ್ಷಣಗಳೆಲ್ಲ ಅವಿಸ್ಮರಣೀಯ. ನನ್ನೆಡೆಗೆ ಆತ ನೋಡಿದ ಚಿಕ್ಕ ನೋಟವನ್ನೂ ಕೂಡ ಮನಸ್ಸು ರೆಕಾರ್ಡ್ ಮಾಡಿಟ್ಟುಕೊಂಡಿರುತ್ತದೆ. ಅದನ್ನು ಮನಸ್ಸು ಮೆಲುಕು ಹಾಕಿದಾಗಲೆಲ್ಲ ಹೃದಯ ನವಿಲುಗರಿಬಿಚ್ಚಿ ಕುಣಿದಾಡುತ್ತದೆ. ಅಬ್ಬ! ಪ್ರೇಮವೇ, ನಿನ್ನ ಒಂದು ಚಿಕ್ಕಲಹರಿ ಇಷ್ಟು ಗಾಢವಾಗಿ ಮನ ತಟ್ಟುತ್ತಾ ಎಂದು ಚಿಕ್ಕ ಮಗುವಿನಂತೆ ಅಚ್ಚರಿ ಪಡುತ್ತೇನೆ! ಅಂತಹ ಅನುಭವ ಪಡೆಯದ ಜೀವಗಳನ್ನು ನೋಡಿ ಗೆಲುವಿನ ನಗೆ ಮೂಡುತ್ತದೆ ನನ್ನೊಳಗೆ.

ಸದ್ಯಕ್ಕೆ ಅವನ ಸ್ನಿಗ್ಧ ನಗುವಿನ ಚಿಕ್ಕ ಫೋಟೋನೇ ನನ್ನ ಆಸ್ತಿ. ಅವನ ನಗುವಿನೊಳಗೆ ಮುಳುಗಿ ಒದ್ದೆ ತಂಪಿನ ಸುಲ್ಹ ಅನುಭವಿಸುತ್ತೇನೆ. ಖುಷಿಯಾದಾಗ ದುಃಖವಾದಾಗ ಏನೂ ಭಾವನೆ ಮೂಡದಿರುವಾಗ – ಯಾವಾಗಲೂ ಅವನೊಳಗೇ ಇರುವಾಸೆ ಮನಸ ಬಸಿರಿಗೆ. ಈ ಆಸೆಯ ಬಸಿರಿಗೆ ಹೆರಿಗೆ ಯಾವಾಗ?

ಸ್ವಲ್ಪ ದಿನ ಕಳೆಯಿತು. ಒಮ್ಮೆ ತಂದೆ ಮನೆಗೆ ಬರುವಾಗ ಎಂದಿನಂತಲ್ಲದೆ ಬಹಳ ಉತ್ಸಾಹದಿಂದ ಬಂದರು. ಅವರು ತಂದ ಸುದ್ದಿಗೆ ನನ್ನ ಮನಕ್ಕೆ ಬುದ್ಧಿ ಭ್ರಮಣೆಯಾದಂತಾಯಿತು. ನನ್ನ ಮದುವೆಗೆ ಯಾವುದೋ ಹುಡುಗನನ್ನು ಹುಡುಕಿದ್ದು ನನ್ನ ನೋಡಲು ಒಂದೆರಡು ದಿನಗಳಲ್ಲಿ ಬರುತ್ತಾನಂತೆ. ಒಂದೇ ಉಸಿರಿಗೆ ರೂಮಿಗೆ ಓಡಿದೆ. ಅವರು ನಾಚಿಕೆ ಅಂದುಕೊಂಡರು. ಬಾಗಿಲು ಹಾಕಿಕೊಂಡು ಹಾಸಿಗೆಯಲ್ಲಿ ಬಿದ್ದು ಮನಸಾರೆ ಅತ್ತೆ. ಮನದ ರೋದನ ಮುಸಲ ಧಾರೆಯಾಗಿ ದಿಂಬನ್ನೆಲ್ಲ ಒದ್ದೆಯಾಗಿಸಿತು. ಮೌನ ಎಷ್ಟು ಅಸಹನೀಯ! ಪ್ರೀತಿ ಅವನಲ್ಲೂ ಇದೆ. ಆದರೆ ಅವರ ಮಧ್ಯೆ ಹಾಳು ಭಯವಿದೆಯಲ್ಲ! ಭಯದ ಮಗುವಾದ ಮೌನದ ಹೊರೆಯಿದೆಯಲ್ಲ ಅದನ್ನು ಸರಿಸುವವರು ಯಾರು? ಅವನಾ..? ನಾನಾ..?

ಗಂಡಸರಿಗೇನಾಗಬೇಕು? ಮರೆತೂ ಸುಖವಾಗಿರಬಲ್ಲರು. ಆದರೆ ಹೆಂಗಸಿನ ಪ್ರಥಮ ಪ್ರೇಮವಿದೆಯಲ್ಲ, ಅಂಟಿಕೊಂಡರೆ ಬಿಡದು. ಬದುಕಿನುದ್ದಕ್ಕೂ ಹೃದಯದ ಹೊಟ್ಟೆಯಲ್ಲಿಟ್ಟುಕೊಂಡೇ ಬಾಳಬೇಕು. ಆ ಹಾಳು ಹಾದರ ಯಾರಿಗೆ ಬೇಕು?

ಇಷ್ಟಕ್ಕೂ ಒಂದು ವಿಷಯ ಮಾತ್ರ ಖಂಡಿತ. ಹೃದಯಕ್ಕೆ ಬೇರಾರೂ ಬೇಡ. ಅವನಿಗೇ ಮೀಸಲಾಗಿದೆ ಈ ಬದುಕು. ಬೇರೆ ಯಾರನ್ನೂ ಪ್ರೀತಿಸಲಾರೆ. ಬೇರಾರಿಗೂ ಒಲವಧಾರೆ ಎರೆಯಲಾರೆ.

ಆದರೆ ಇದನ್ನೆಲ್ಲ ತಂದೆಗೆ ಹೇಗೆ ಹೇಳಲಿ? ಹತ್ತೊಂಭತ್ತು ವರ್ಷ ಪೋಷಿಸಿದವರವರು. ತಿದ್ದಿ ತೀಡಿದವರು… ಹೇಗೆ ಎದುರಾಡಲಿ ಅಕ್ಕನಂತೆ.

ಸ್ವಲ್ಪ ಹೊತ್ತು ಕುಳಿತು ಆಲೋಚಿಸಿದೆ. ಇಬ್ಬರ ಪ್ರೀತಿ ನಡುವೆ ಮೌನ ಭಾರ, ಅಸಹನೀಯ. ಅವನ ಬಳಿಯೇ ಹೋಗಬೇಕು. ಭಯ, ಸಂಕೋಚ ಎಲ್ಲದಕ್ಕೂ ತಿಲಾಂಜಲಿ ಕೊಟ್ಟು ಬಿಡಬೇಕು. ನನ್ನೊಳಗಿನೊಲವು ತಿಳಿಸಿಬಿಡಬೇಕು. ನಾಳೆ ಹೇಳುವೆನೆಂದರೆ ಬಾಳೆ ಕೂಪದಲ್ಲಿ ಬಿದ್ದೀತು. ಇವತ್ತೇ ಏನಾದರಾಗಲೀ ಹೇಳಿ ಬಿಡಬೇಕೆಂದು ನಿರ್ಧರಿಸಿದೆ.

ಒಂದುವೇಳೆ ಆತ ಒಲ್ಲೆ ಎಂದರೆ? ದಡ ಕಾಣದ ಹಡಗಿನಂತಾದೀತು ಮನಸು. ಅಂತಹ ಪರಿಸ್ಥಿತಿ ಊಹಿಸಲೂ ನಿರಾಕರಿಸಿತು ಮನ.
……………….

ಪ್ರಿಯ ಸಖನಿಗೆ,
ಭರಿಸಲಾಗದಷ್ಟು ಹೊರೆಯಾಗಿದೆ ಈ ಪ್ರೀತಿ. ಹಂಚಿಕೊಳ್ಳದೇ ವಿಧಿಯಿಲ್ಲ ಎಂಬಂತಾಗಿದೆ. ಕಣ್ಣ ಕುಡಿಯಂಚಿನ ಪ್ರೇಮದಾಟ ಸಾಕು. ಹೃದಯದ ‘ನೀನೇ ಬೇಕೆಂಬ’ ಹಠ ಹೆಚ್ಚಾಗಿದೆ. ನಿನ್ನೊಳಗೂ ನನ್ನ ಬಗ್ಗೆ ಪ್ರೇಮವಿದೆಯಾ? ಇದೆಯಾದರೆ ಹಂಚಿಕೋ. ಇಲ್ಲವಾದರೆ ಈ ಪತ್ರ ಹರಿದು ಚೂರು ಮಾಡು.
ನಿನ್ನ
ಶರ್ಮಿಳ

ಹೀಗೆ ಬರೆದು ಮಡಚಿ ಪುಸ್ತಕದೊಳಗಿಟ್ಟುಕೊಂಡಳು. ಕಾಲೇಜು ಬಿಡುವ ಸಮಯಕ್ಕಾಗಿ ಕಾಯತೊಡಗಿದೆ. ಕ್ಲಾಸಿನಲ್ಲಿ ಅನ್ಯಮನಸ್ಕತೆ ಬದುಕು ಏನಾದೀತೋ ಎಂಬ ಭೀತಿ. ಆತನ ಉತ್ತರವೇನೋ ಎಂಬ ಆತಂಕ. ಏನಾದರಾಗಲಿ ಇಂದೇ ನಿರ್ಧಾರವಾಗಿ ಹೋಗುವುದೆಂಬ ನಿರುಮ್ಮಳತೆ ಮತ್ತೊಂದು ಕಡೆ.

ಸಂಜೆ ಕಾಲೇಜು ಬೀಡುವ ಸಮಯದಲ್ಲಿ ಆಗಸದ ತುಂಬ ಮೋಡ. ಸಣ್ಣ ಮಬ್ಬುಗತ್ತಲೆ. ಉಸಿರು ಬಿಗಿ ಹಿಡಿದು ಕಾಲೇಜು ಗೇಟ ಬಳಿ ನಿಂತೆ. ತುಂಬು ಜನಸಂದಣಿ ಮಧ್ಯೆ ಜಾಗ ಮಾಡಿಕೊಂಡು ಆತ ಬರುತ್ತಿದ್ದ. ಹತ್ತಿರ. ಇನ್ನೂ ಹತ್ತಿರ ಬಂದ. ಹತ್ತಿರ ಬಂದಷ್ಟೂ ಹೆಚ್ಚುವ ಭಯ, ನಡುಕ.

“ಒಂದ್ನಿಮಿಷ ನನ್ನ ಜೊತೆ ಬರ್ತೀರಾ?” ಕೇಳಿದೆ. ಆಶ್ಚರ್ಯಕರ ಮುಖಭಾವದೊಂದಿಗೆ ‘ಸರಿ’ ಎಂದನಾತ.

ಮೈದಾನದೆಡೆಗೆ ಏಕಾಂತವನ್ನರಸಿ ಹೋಗುತ್ತಿದ್ದರೆ ನನ್ನ ಹಿಂದೆಯೇ ಬರುತ್ತಿದ್ದ, ಚಿಕ್ಕದಾಗಿ ಊಟದೆಲೆಗೆ ನೀರು ಚಿಮುಕಿಸಿದಂತೆ ಹೊಯ್ಯುತ್ತಿತ್ತು ಮಳೆ.

ಮೈದಾನದ ಮೂಲೆಗೆ ಕರೆದೊಯ್ದು ನೀಡಿದ ಪತ್ರ, ಆತನ ಕೈಗಿಟ್ಟು ಆತನನ್ನು ಎದುರಿಸಲಾಗದೆ ಈ ಕಡೆ ಬಂದು ಬಿಟ್ಟೆ. ಮರದ ಕೆಳಗೆ ಮರೆಯಲ್ಲಿ ನಿಂತು ಆತನನ್ನು ಗಮನಿಸುತ್ತಿದ್ದೆ.

ಮಳೆ ಸಣ್ಣಗೆ ಬರುತ್ತಿದ್ದುದು ಹೆಚ್ಚುತ್ತಾ ಹೋಯಿತು. ಅಂತೆಯೇ ನನ್ನ ಆತಂಕವೂ! ಆತ ಓದುವುದ ಮುಗಿಸಿ ಕಣ್ಣು ಮುಚ್ಚಿ ನಿಂತಿದ್ದ. ಮೊಗದ ತುಂಬ ಮಳೆನೀರು. ಅಳುತ್ತಿರುವನಾ? ಗೊತ್ತಾಗಲಿಲ್ಲ.

ಸ್ವಲ್ಪಹೊತ್ತು ಕಾದೆ. ಬರಲಿಲ್ಲ. ತಿರುಗಿ ನೋಡಲೂ ಇಲ್ಲ. ಭಯವಾಯಿತು. ಆತನ ಬಳಿ ಓಡಿದೆ. ಆತನಿನ್ನೂ ತೊಯ್ಯುತ್ತಲೇ ಇದ್ದ; ಬಯಲ ಮಧ್ಯದ ಮರದಂತೆ. ಅವನ ಶರಟು ಹಿಡಿದೆ. “ಏನಾಯ್ತು” ಕೇಳಿದೆ. ನಿರ್ಭಾವುಕ ನೋಟ ನನ್ನತ್ತ ಎಸೆದ. “ಸಾರಿ ಶರ್ಮಿಳ ಶರ್ಮಿಳ ಇಷ್ಟು ದಿನ ನಿನ್ನನ್ನು ಕಾಡಿದ್ದಕ್ಕೆ ಪ್ರೀತಿ ನನ್ನಲ್ಲೂ ಇದೆ” ಅಂದ. ನನ್ನ ಮೇಲೆ ಬೀಳುತ್ತಿರುವುದು ನೀರಹನಿಯಲ್ಲ ಪನ್ನೀರ ಸುರಿಮಳೆ ಅನ್ನಿಸಿತು. ಆನಂದದಿಂದ ತಬ್ಬಿಕೊಂಡೆ ಮತ್ತೆ ಹೇಳಿದೆ, “ನಾನೇ ನಿನ್ನ ಬಳಿ ಬಂದು ಕೇಳಬೇಕಿತ್ತು. ಕ್ಷಮಿಸು ಇಷ್ಟು ದಿನ ಹೇಳದಿದುದಕ್ಕೆ ಕಾರಣ ನನಗಿದ್ದ ಭಯವೇ. ನಿನ್ನ ನಿರಾಕರಣೆಯ ಭಯ. ನೀನೇ ಒಪ್ಪಿಕೊಂಡ ಮೇಲೆ ಇನ್ನು ಯಾವ ಭಯವೂ ಇಲ್ಲ.”

“ಆದರೆ ನನ್ನ ತಂದೆ ನನಗೆ ಬೇರೆ ಹುಡುಗನನ್ನು ನೋಡುತ್ತಿದ್ದಾರೆ…” ಅಂದೆ.

“ಇವತ್ತೇ ಹೋಗಿ ಮಾತಾಡುತ್ತೇನೆ. ಪ್ರೀತಿ ಮಾಡಿದರೆ ಭಯ ಪಡಬಾರದು. ಇದೇ ನಾನು ಕಲಿತ ಪಾಠ.”

“ನನ್ನ ತಂದೆ ಒಪ್ಪದಿದ್ದರೆ…?”

“ಒಪ್ಪಿಸುವೆ ಎಂಬ ನಂಬಿಕೆ ನನಗಿದೆ.” ಅಂದ.

ಜಡಿ ಮಳೆಯಲ್ಲಿ ಇಬ್ಬರೂ ಒಟ್ಟಾಗಿ ಒದ್ದೆಯಾದೆವು. ಇನ್ನು ಯಾವ ಬೆದರು ಮಳೇಗೂ ಬಗ್ಗುವವಳಲ್ಲ ನಾನು, ಸಂಗಾತಿಯಾಗಿ ಅವನಿರುವ ತನಕ…

ಟಿಪ್ಪಣಿಗಳು
  1. ಅನಾಮಿಕ ಹೇಳುತ್ತಾರೆ:

    manassige thumbaa hattiravagide:)

  2. usharani ಹೇಳುತ್ತಾರೆ:

    tumba canangide. khushiyayitu. priitige astu dhyrya ide, ellavannu edurisuva shakthi ide.aadare adu nijavaada nirmalavaada priiti aagirabeku aste. tumba ista aitu.

ನಿಮ್ಮ ಟಿಪ್ಪಣಿ ಬರೆಯಿರಿ