ಇತ್ತೀಚೆಗೆ ಓದಿದ ಪುಸ್ತಕಗಳಲ್ಲಿ ನನ್ನನ್ನು ತುಂಬಾ ಬದಲಾಯಿಸಿದ ಪುಸ್ತಕದ ಕುರಿತು ಹೇಳಬೇಕನ್ನಿಸುತ್ತಿದೆ. ರುಜುತಾ ದಿವೇಕರ್ ಬರೆದಿರುವ ಡೋಂಟ್ ಲೂಸ್ ಯುವರ್ ಮೈಂಡ್, ಲೂಸ್ ಯುವರ್ ವೆಯ್ಟ್ – ಅನ್ನುವುದು ಆ ಪುಸ್ತಕದ ಹೆಸರು. ಕಮರ್ಷಿಯಲ್ ದೃಷ್ಟಿಯಿಂದ ಪುಸ್ತಕದ ಶೀರ್ಷಿಕೆ ತೂಕ ಇಳಿಸುವ ಬಗ್ಗೆ ಇದ್ದರೂ, ಪುಸ್ತಕದ ಒಳಗೆ ಆರೋಗ್ಯಕರವಾದ ಬದುಕನ್ನು ಕಟ್ಟಿಕೊಳ್ಳುವ ವಿಚಾರವನ್ನು ಬಹಳ ಸರಳವಾಗಿ, ತರ್ಕಬದ್ಧವಾಗಿ ಮಂಡಿಸುತ್ತಾರೆ ರುಜುತಾ. ಕರೀನಾ ಕಪೂರ್ ಗೆ ಡಯಟಿಷಿಯನ್ ಆಗಿ, ಆಕೆಯ ಜೀರೋ ಸೈಜ್ ಗೆ ಕಾರಣೀಭೂತರಾಗಿದ್ದುದರಿಂದ ಒಮ್ಮಿಂದೊಮ್ಮಲೆ ಪ್ರಸಿದ್ಧಿ ದೊರಕಿದರೂ, ಆಕೆಯ ಥಿಯರಿಗಳು ತುಂಬಾ ಸುಲಭ ಸಾಧ್ಯವಾದುದು. ಎಲ್ಲ ವರ್ಗದ ಜನರೂ ಆರಾಮಾಗಿ ಪಾಲಿಸಬಲ್ಲಂಥದ್ದು.
ಪುಸ್ತಕ ಓದಿ ಅಂತ ಹೇಳುತ್ತಲೇ ಆಕೆಯ ಕೆಲ ಮುಖ್ಯ ಥಿಯರಿಯನ್ನು ಇಲ್ಲಿ ಪಟ್ಟಿ ಮಾಡುತ್ತಿದ್ದೇನೆ. ಇನ್ನಷ್ಟು ವಿವರಗಳಿಗೆ ಕಾಪಿ ರೈಟ್ ಸಮಸ್ಯೆಯ ಕಾರಣ ನೀವು ಪುಸ್ತಕದ ಮೊರೆ ಹೋಗಬೇಕಾಗುತ್ತದೆ.
೧. ಬೆಳಿಗ್ಗೆ ಎದ್ದ ಹತ್ತು ಹದಿನೈದು ನಿಮಿಷದಲ್ಲಿ ಹಣ್ಣು, ಡ್ರೈ ಫ್ರೂಟ್ಸ್ ಇಂತದ್ದೇನಾದರೂ ತಿನ್ನಬೇಕು. ಎದ್ದ ಕೂಡಲೇ ಕಾಫಿ ಮತ್ತು ಟೀ ಮಾತ್ರ ಯಾವ ಕಾರಣಕ್ಕೂ ಸಲ್ಲದು. ಕಾಫಿ ಇಲ್ಲದೇ ಬಾಳಲಾಗದವರು, ಎರಡನೇ ಉಪಹಾರದ ನಂತರ ಕಾಫಿ ಸೇವಿಸಬಹುದು.
೨. ದಿನವಿಡೀ ೨ ಅಥವಾ ಮೂರು ಘಂಟೆಗೊಮ್ಮೆ ಸ್ವಲ್ಪ ಆಹಾರ ಸೇವಿಸಬೇಕು. ಅಂದರೆ ಬೆಳಿಗ್ಗೆ ಉಪಹಾರಕ್ಕೆ ಏನು ತಿನ್ನುತ್ತೀರೋ ಅದರ ಅರ್ಧದಷ್ಟನ್ನು ಎರಡು ಬಾರಿ ಎರಡು ಗಂಟೆ ಗ್ಯಾಪ್ ನಲ್ಲಿ ತಿನ್ನುವುದು. ದಿನವಿಡೀ ಕಡಿಮೆ ಆಹಾರವನ್ನು, ಸಮಯದ ಗ್ಯಾಪ್ ಇಟ್ಟು, ಹೆಚ್ಚು ಬಾರಿ ಸೇವಿಸಬೇಕು.
೩. ದಿನದಲ್ಲಿ ನೀವು ಹೆಚ್ಚು ಆಕ್ಟಿವ್ ಆಗಿರುವಂಥ ಸಮಯದಲ್ಲಿ ಹೆಚ್ಚು ತಿನ್ನುವುದು, ಕಡಿಮೆ ಆಕ್ಟಿವಿಟಿ ಇರುವಾಗ ಕಮ್ಮಿ ತಿನ್ನುವುದು.
೪. ರಾತ್ರಿ ಮಲಗುವ ಎರಡು ಅಥವಾ ಮೂರು ಗಂಟೆ ಮುಂಚಿತವಾಗಿ ರಾತ್ರಿಯೂಟವನ್ನು ಮಾಡುವುದು.
ಇಷ್ಟೇ ಸಿಂಪಲ್ ಆದ ಪಾಯಿಂಟ್ಸ್ ಗಳು ಈ ಪುಸ್ತಕದ ಜೀವಾಳ. ಇದನ್ನು ಯಾಕೆ ಮಾಡಬೇಕು, ಮಾಡುವುದರಿಂದ ಪ್ರಯೋಜನವೇನು ಎಂಬುದನ್ನು ರುಜುತಾ ವಿವರಿಸಿದ್ದಾರೆ. ಜೊತೆಗೆ ಎಂಥೆಂಥ ಆಹಾರವನ್ನು ಸೇವಿಸಬಹುದು, ಸೇವಿಸಬಾರದು ಎಂಬದರ ಬಗ್ಗೆ ಕೂಲಂಕಷ ವಿವರಣೆ ಸಿಗುತ್ತದೆ. ಆಹಾರದ ಜೊತೆಗೆ ವಾರಕ್ಕೆ ಕಡಿಮೆ ಅಂದರೆ ಮೂರು ಗಂಟೆಗಳ ಕಾಲ ವ್ಯಾಯಾಮ ಅಗತ್ಯ. ಇದಕ್ಕೆ ಮಾತ್ರ ಯಾವ ಶಾರ್ಟ್ ಕಟ್ ಇಲ್ಲ ಅಂತ ಖಡಾಖಂಡಿತವಾಗಿ ಹೇಳುವ ರುಜುತಾರ ಮತ್ತೊಂದು ಪುಸ್ತಕ ವ್ಯಾಯಾಮದ ಬಗ್ಗೆಯೇ ಇದೆ.
*****
ಮೊನ್ನೆ ಸುಚಿತ್ರಾ ಫಿಲಂ ಸೊಸೈಟಿ ಅಂಗಳದಲ್ಲಿ ಯೋಗರಾಜ್ ಭಟ್ ರ ಜೊತೆ ಸಂವಾದವಿತ್ತು. ಈ ಸಂವಾದಕ್ಕೂ ಮೊದಲು ಅವರ ಉಢಾಫೆ ಪ್ರವೃತ್ತಿಯಿಂದಾಗಿ ಅವರ ಬಗ್ಗೆಯೇ ನನ್ನೊಳಗೆ ಒಂದು ಉಢಾಫೆ ಮನೆಮಾಡಿತ್ತು. ಅವರ ಆ ಎರಡು ಗಂಟೆಯ ಸಂವಾದದ ಬಳಿಕ ಅವರ ಬಗ್ಗೆ ಇದ್ದ ಪೂರ್ವಗ್ರಹ ಹೊರಟು ಹೋಯಿತು. ಯೋಗರಾಜ್ ಭಟ್ ಯಾವುದೇ ಪ್ಲಾನ್ ಇಟ್ಟುಕೊಂಡು ಮಾತಾಡುವುದಿಲ್ಲ. ಆ ಕ್ಷಣ ಅನ್ನಿಸಿದ್ದನ್ನು, ಒಂಚೂರು ತನ್ನ ಮೇಲೆ ತಾನೇ ವ್ಯಂಗ್ಯವಿಟ್ಟುಕೊಂಡು, ತೆಳು ಹಾಸ್ಯದ ಲೇಪದ ಮೂಲಕ ನಿಶ್ಕಲ್ಮಷವಾಗಿ ಹೇಳಿಬಿಡುತ್ತಾರೆ. ಇನ್ನೊಂದು ಅರಿವಾದ ವಿಚಾರವೆಂದರೆ ಅವರ ಓದಿನ ಹರವು ವಿಸ್ತಾರವಾಗಿದೆ. ಬಹುಶಃ ಇದುವರೆಗೂ ಚಿತ್ರರಂಗದಲ್ಲಿ ಗಟ್ಟಿಯಾಗಿ ತಮ್ಮ ಛಾಪನ್ನು ಉಳಿಸಿಕೊಳ್ಳಲು ಅವರ ಸಾಹಿತ್ಯಾಭಿರುಚಿಯೇ ಕಾರಣವಿರಬೇಕು. ಚಿತ್ರಗೀತೆ ಬರೆಯುವಾಗ ಎಂಥ ಎಬುಡ ತಬುಡ ಪ್ರಯೋಗಗಳ ಮಾಡಲು, ಕಾರಣ ಕನ್ನಡ ವ್ಯಾಕರಣದ ಜ್ಞಾನ, ಬೇರೆ ಬೇರೆ ಧಾಟಿಯ ಕನ್ನಡದ ಮೇಲಿನ ಹಿಡಿತ, ಸಾಹಿತ್ಯ ಬಲ್ಲ ಆತ್ಮವಿಶ್ವಾಸವೇ ಅನ್ನುವುದು ಅರಿವಾಗ್ತದೆ.
ಅವರು ಆ ದಿನ, ಈ ಮುಖ್ಯವಾದ ವಿಚಾರಗಳ ಕುರಿತು ಮಾತಾಡಿದರು (ಅವರು ಹೇಳೋ ಶೈಲಿ ಬೇರೆ, ಅದರ ಸಾರ ಮಾತ್ರ ಇಲ್ಲಿದೆ) :-
~ ಸಿನಿಮಾ ಅಂದರೆ ನನಗೆ ಯಾವಾಗಲೂ ಎರಡು ಘಟನೆಗಳು ಕಾಡುತ್ತದೆ. ಒಮ್ಮೆ ಒಂದು ಸಾಹಿತ್ಯ ಸಭೆಯಲ್ಲಿ ಲೇಖಕರೊಬ್ಬರು ಸಾಹಿತ್ಯದ ಕುರಿತು ಭೀಷಣವಾಗಿ ಭಾಷಣ ಮಾಡುತ್ತಿದ್ದರು. ಬಹುಶಃ ಭಾಷಣದ ಓಘದಲ್ಲಿ ಮೈಮರೆತು ಸಾಹಿತ್ಯವನ್ನು ಓದಿಕೊಳ್ಳದವನು ಮನುಷ್ಯನೇ ಅಲ್ಲ ಎಂದು ಬಿಟ್ಟರು. ಅಲ್ಲಿ ಕೂತಿದ್ದ ಮುದುಕನಿಗೆ ಅದು ನೋವುಂಟು ಮಾಡಿರಬೇಕು, ಸರ…ಒಂದ್ನಿಮಿಷರೀ..ಅಂದ. ಸಭೆ ಅವರತ್ತ ತಿರುಗಿತು. ಅವರು ಎದ್ದು ನಿಂತು ಅಲ್ಲಾ.. ಈ ಸಾಹಿತ್ಯ ಪಾಹಿತ್ಯ, ಕಥೀ ಪಥೀ ಓದ್ಲಿಲ್ಲಾ ಅಂದ್ರೆ ಮನುಷ್ಯಾನೇ ಅಲ್ಲ ಅಂತೀರಲ್ರೀ.. ನಾನಾಗ್ಲೀ, ನಮ್ಮಪ್ಪನಾಗ್ಲೀ, ನಮ್ಮ ದೊಡ್ಡಪ್ಪ, ನಾವು ಏಳು ಜನ ಅಣ್ಣತಮ್ಮಂದಿರಿದೀವು.. ಯಾರೂ ಇದುವರೆಗೂ ಒಂದ್ ಪೇಜೂ ಓದಿಲ್ಲ.. ನಾವ್ ಮನುಷ್ಯರು ಹೌದೋ ಅಲ್ಲೋ..? ಅಂತ ಕೇಳಿಯೇ ಬಿಟ್ಟರು.
ಇನ್ನೊಂದು ನಾಗತಿಹಳ್ಳಿಯವರ ಸಿನಿಮಾ ಕ್ಲಾಸ್ ನಲ್ಲಿ ನಡೆದದ್ದು -ಅದರ ಸಾರಾಂಶ ಎಂದರೆ, ಸಿನಿಮಾ ಎಂದರೇನು ಅನ್ನೊ ಪ್ರಶ್ನೆ ಬಂದಾಗ, ಭಟ್ಟರು ಹೇಳಿದ್ದು ಸಿನಿಮಾ ಅನ್ನುವುದು ಕೆಲಸವಿಲ್ಲದವರು ಮಾಡುವ ಕೆಲಸ ಅಂತ. ಕೊನೆಗೆ ಅದನ್ನು ವಿವರಿಸಲೇಬೇಕಾಗಿ ಬಂದಾಗ, “ನೀವು ಸಿನಿಮಾ ನೋಡಲು ಹೋಗಬೇಕಾಗಿ ಬಂದಾಗ, ಎಕ್ಸಾಮ್ ಇದ್ರೆ ಹೋಗಲ್ಲ, ಆಫೀಸಿನಲ್ಲಿ ಏನಾದ್ರೂ ಇಂಪಾರ್ಟೆಂಟ್ ಕೆಲ್ಸ ಇದ್ರೆ ಹೋಗಲ್ಲ, ಹತ್ತಿರದವರ್ಯಾದರೂ ತೀರ್ಕೊಂಡಿದ್ದಾಗ ಹೋಗಲ್ಲ, ಹೀಗೆ ಐದಾರು ಘಂಟೆ ಫ್ರೀ ಇದ್ದಾಗ ಮಾತ್ರ ಸಿನಿಮಾ ನೋಡೋದು ಅನ್ನೋದು ನಡೆಯುತ್ತೆ. ಹೀಗಿದ್ದಾಗ ಸಿನಿಮಾ ಅನ್ನೋದು ಕೆಲಸವಿಲ್ಲದವರು ನೋಡುವ, ಮತ್ತಷ್ಟು ಕೆಲಸ ಇಲ್ಲದವನೇ ಮಾಡೋ ಕೆಲಸ ಅನ್ನುವುದನ್ನು ಹಾಸ್ಯವಾಗಿ, ವಿಡಂಬನೆಯಿಂದ ತನ್ನನ್ನು ತಾನೇ ಗೇಲಿ ಮಾಡಿಕೋತಾ ವಿವರಿಸಿದ್ರು.
~ ಯಾವ ಯಾವ ಭಾಷೆಯಲ್ಲಿ ಸಾಹಿತ್ಯ ಸಮೃದ್ಧವಾಗಿದೆಯೋ ಅಲ್ಲಿ ಚಿತ್ರರಂಗ ತುಂಬಾ ದುರ್ಬಲವಾಗಿರುತ್ತದೆ (ಕಮರ್ಷಿಯಲ್ಲೀ). ಇದಕ್ಕೆ ಕನ್ನಡ, ಬೆಂಗಾಳೀ, ರಾಜಸ್ಥಾನೀ ಭಾಷೆಗಳು ಉದಾಹರಣೆ.
~ ಕನ್ನಡ ಚಿತ್ರಗಳನ್ನು ನೋಡುವವರು ಬಹುತೇಕ ಹದಿನಾರರಿಂದ ಇಪ್ಪತ್ತೈದು ವಯಸ್ಸಿನವರು. ಅವರು ಮೊದಲು ನೋಡಿ, ಅವರಿಗಿಷ್ಟ ಆದರೆ ಮಾತ್ರ ಅವರ ಅಪ್ಪ ಅಮ್ಮ, ಅಂಕಲ್ ಆಂಟಿ, ಅಕ್ಕ ಭಾವ ನೋಡೋಕೆ ಬರ್ತಾರೆ. ಹಾಗಾಗಿ ನನ್ನ ಸಿನಿಮಾ ಅವರನ್ನು ಓಲೈಸುವ ಹಾಗಿರುತ್ತದೆ. ಅದು ಈಗಿನ ಮಾರುಕಟ್ಟೆಯ ಅವಶ್ಯಕತೆ ಕೂಡ.
~ ಎಲ್ಲರೂ ಒಳ್ಳೆ ಸಿನಿಮಾ ಮಾಡಿ, ಒಳ್ಳೇ ಕಥೆ ಬರೀರಿ ಅಂತಾರೆ. ಮಾಡಿದರೆ ನೋಡಲ್ಲ. ಬರೆದರೆ ಓದಲ್ಲ.
~ ನಾನು ಕಥೆಯನ್ನು ಪಾತ್ರಗಳ ಮೂಲಕ ಹೇಳಲು ಬಯಸ್ತೇನೆ. ನಂಗೆ ಸಿನಿಮಾ ಮಾಡಲು ಒಂದೊಳ್ಳೆ ಪಾತ್ರ ಸಿಕ್ಕರೆ ಸಾಕು. ಇದು ತಪ್ಪು ಅಂತ ಗೊತ್ತು. ಇಲ್ಲಿ ಸಿನಿಮಾ ಮಾಡಬಯಸುವ ನಿರ್ದೇಶಕರಿಗೆ ಹೇಳೋದು ಒಳ್ಳೆ ಕಥೆ ಇಟ್ಕೊಂಡು ಸಿನಿಮಾ ಮಾಡಿ.
ಇನ್ನಷ್ಟು ಒಳ್ಳೆಯ ಸಂವಾದ ಅಲ್ಲಿ ನಡೆಯಿತು. ಮೆದುಳಿಗೆ ಒಳ್ಳೆ ಮೇವು ದೊರಕಿಂದಂತೆ ಸಂತೃಪ್ತಿಯಿಂದ ಹೊರಬಂದೆ.