ಡಿಯರ್ ಗುಂಗರಮಳೆಯ ಗೊಂಬೆ
ಈಗಲೂ ಅನ್ಸೋದು; ನಿನ್ನನ್ನು ಸರಿಯಾಗಿ ನಾನಿನ್ನೂ ನೋಡೇ ಇಲ್ಲ. ಹೌದು; ತುಂಬಾ ಸಲ ಕದ್ದು ನೋಡೋಕೆ ಪ್ರಯತ್ನ ಪಟ್ಟಿದೀನಿ. ಆದರೆ, ಆ ಆಯಸ್ಕಾಂತ ಕಣ್ಣುಗಳ ಸೆಳೆತದಿಂದ ಹೊರಬಂದು ನಿನ್ನನ್ನು ಕಣ್ತುಂಬಾ ನೋಡಬೇಕು ಎಂಬ ಆಸೆ ಮರೀಚಿಕೆಯಾಗೇ ಉಳಿದಿದೆ. ನಿಜ್ಜಾ ಹೇಳ್ತೀನಿ; ನಿನ್ನ ಕಿವಿಯ ಲೋಲಾಕನ್ನು ಫೇಸ್ ಬುಕ್ ನ ಪ್ರೊಫೈಲ್ ಫೊಟೋದಲ್ಲಿ ನೋಡಿದ್ದೇನೆಯೇ ವಿನಾ ನಿಜವಾಗಿ ಅದರ ಅಂದವನ್ನು ಇನ್ನೂ ನಾ ಸವಿದೇ ಇಲ್ಲ! ನಿನ್ನ ಕಂಗಳಿಗೆ ಅದೆಂಥಾ ಶಕ್ತಿಯಿದೆಯೇ ಮಾರಾಯ್ತೀ. ದೇವರನ್ನೇ ನಂಬಬೇಕು ಅನ್ನುವಷ್ಟು! ನಿಂಗೇ ಗೊತ್ತಿರೋ ಹಾಗೆ ನಾನು ಅದೆಷ್ಟು ಸಲ ಆ ಸೆಳೆತವನ್ನು ಭರಿಸಲಾಗದೇ ಮುಖ ತಗ್ಗಿಸಿದ್ದಿದೆ. ಆ ಹೋರು ಬೆಳಕಿಗೆ ಕಣ್ಣೊಡ್ಡಲಾಗದೇ ಸೋತಿದ್ದೇನೆ. ನೀನು ನನ್ನತ್ತ ನೋಡಿದ ಒಂದು ಸೆಕೆಂಡನ್ನು ತುಂಬಿಕೊಳ್ಳಲು ಈ ಮನಸ್ಸಿಗೆ ಏದುಸಿರು. ಆ ಬೆಳಕು ಮೈಯೆಲ್ಲಾ ವ್ಯಾಪಿಸಿ, ಆತ್ಮ ಒಮ್ಮೆ ಕಂಪಿಸಿ, ಬೆಳಕಿನ ಸ್ನಾನವಾದಷ್ಟೇ ಮನಸ್ಸು ಶುದ್ಧ ಶುದ್ಧ!
ನೀ ಬಂದು.. ಬಳಿ ನೀ ಬಂದು..
ಈ ಸ್ವಪ್ನದ ಗಾಯ ನೋಡು…
ನೀನು ಎ.ಆರ್.ರೆಹಮಾನ್ ಸಂಗೀತದ ಹಾಗೆ; ಗುಟುಕು ಬಿಯರಿನ ಹಾಗೆ. ಮೊದಲಿಗೆ ಇಷ್ಟ ಅನ್ನಿಸಲ್ಲ. ಆದರೆ ಒಮ್ಮೆ ಗುಂಗು ಹತ್ತಿಬಿಟ್ಟರೆ ಮತ್ತೆ ಮತ್ತೆ ನೋಡುವ ಆಸೆ. ನೀನು ಜೀವನ ಪೂರ್ತಿ ಗುನುಗುವ ಗಾನ, ಸದಾ ಎದೆಯೊಳಗೇ ಉಳಿಯುವ ರಾಗ. ನೀನು ನನ್ನ ಹೃದಯದಲ್ಲಿರುವ ಮಚ್ಚೆ. ತಿರುಮಲೇಶರ ಅಕ್ಷಯ ಕಾವ್ಯದಂತೆ – ಯಾವ ಪುಟದಿಂದಾದರೂ ಶುರು ಮಾಡಿ- ಯಾವ ಪುಟದಲ್ಲಾದರೂ ನಿಲ್ಲಿಸಿ – ಎದೆ ತುಂಬಿಕೊಳ್ಳಬಹುದಾದಂತ ಅನನ್ಯ ಕಾವ್ಯ. ಚಂದದ ಸಾಲೊಂದನ್ನು ಬರೆಯುವಾಗ ಕಾಯ್ಕಿಣಿಯ ಭಾವವಿನ್ಯಾಸದಲ್ಲಿ ಮೂಡಿದ ಪಲುಕು. ನಿನ್ನಲ್ಲೇ ಕೆ.ಎಸ್.ನ. ಕವಿತೆಯ ಎಲ್ಲಾ ನಯ ನಾಜೂಕು ಮನೆ ಮಾಡಿದೆ. ನಿನ್ನ ಕಂಗಳು ಮಣಿಕಾಂತ್ ಪುಸ್ತಕದ ಶೀರ್ಷಿಕೆಯಂತಿರುತ್ತದೆ, ಒಮ್ಮೆ ಒಳ ಹೊಕ್ಕು ನೋಡಬೇಕೆಂಬ ಆಸೆ ಹುಟ್ಟಿಸುತ್ತದೆ. ಹೊಕ್ಕರೆ ನೆನಪುಗಳ ಜೋಳಿಗೆಯಿಂದ ಮನಸ್ಸು ಭಾರ. ನಿನ್ನ ಕೂದಲಿನ ಕಪ್ಪು ಜಲಪಾತದಲ್ಲಿ ಕುವೆಂಪು ಕವಿತೆಗಳ ಗಾಢತೆ, ನವಿರುತನ ಇದೆ. ಒಂದು ಅದ್ಭುತ ಕಥೆ ಬರೆದ ಬಳಿಕ ರವಿ ಬೆಳೆಗೆರೆ ಇಡುವ ಕೊನೆಯ ಫುಲ್ ಸ್ಟಾಪ್ ನಿನ್ನ ಬಿಂದಿ ಅನ್ನಿಸುತ್ತದೆ. ನಿನ್ನ ಕೊರಳಿನ ಪದಕ ನನ್ನ ಹೃದಯ – ಎಂಬಂಥ ಸಾಲು ಬರೆದಾಗ ಎಚ್ಚೆಸ್ವಿಯಲ್ಲಿ ಮೂಡಿದ ಭಾವನೆ ನಿನ್ನ ಕಂಗಳಲ್ಲಿ ಜಿನುಗುತ್ತಿರುತ್ತದೆ. ನಂಗನ್ಸುತ್ತೆ, ನೀನ್ಯಾರನ್ನೆಲ್ಲಾ ನೋಡಿ ನಗುತ್ತೀಯೋ ಅವರೆಲ್ಲಾ ಜೋಗಿಯಂತೆ ಇಪ್ಪತ್ತೈದು ದಿನಕ್ಕೊಂದು ಕಾದಂಬರಿ ಬರೆಯಬಲ್ಲರು. ನಿನ್ನ ಕಿರುಬೆರಳ ಕರೆಗೆ ವಿಶ್ವೇಶ್ವರ ಭಟ್ಟರ ಪುಸ್ತಕದಲ್ಲಿದ್ದಂತೆ ಪ್ರಪಂಚವನ್ನೇ ಗೆಲ್ಲಬಲ್ಲಂಥ ಹುಮ್ಮಸ್ಸನ್ನು ಕೊಡಬಲ್ಲಂಥ ಶಕ್ತಿಯಿದೆ. ಒಂದೊಳ್ಳೆ ಕಥೆ ಬರೆದ ನಂತರ ಚಿತ್ತಾಲರ ಮೈ ಮುರಿಯುವಿಕೆಯ ಸುಖ ನಿನ್ನ ಆಕಳಿಕೆಯಲ್ಲಿದೆ. ನಿನ್ನ ನಗೆಯನ್ನು ಪೋಸ್ಟ್ ಮಾರ್ಟಮ್ ಮಾಡಿ ವಿಶ್ಲೇಷಿಸಿದರೆ ಅದರಲ್ಲಿ ಪೂಚಂತೇ ಬರಹದ ಸವಿಯಿದೆ. ಗಾಳಿಯೊಡನೆ ಆಟವಾಡುವ ನಿನ್ನ ಮುಂಗುರಳಲ್ಲಿ ಬೇಂದ್ರೆ ಕವಿತೆಯ ಅರ್ಥಬದ್ಧ ಪ್ರಾಸ ಇದೆ. ನಿನ್ನ ನಡೆ ನುಡಿಯಲ್ಲಿ ಭೈರಪ್ಪನವರ ಡೀಟೈಲಿಂಗ್ ಇದೆ. ನಿನ್ನ ಮನಸ್ಸು ಮಾತ್ರ – ಅಡಿಗರ ಕವಿತೆಯಂತೆ. ತಿಳಿದುಕೊಂಡಷ್ಟು ಹೊಸ ಅರ್ಥಗಳು, ಒಳಹೊಕ್ಕಷ್ಟೂ ಮತ್ತಷ್ಟು ವಿವರಗಳು.
ಒಟ್ಟಾರೆ ಹೇಳಬೇಕೆಂದರೆ- ನೀನೊಂದು ನಡೆಯುವ ಕವಿತೆ.
ನೀನೆಂದರೆ ನನ್ನೊಳಗೆ… ಏನೋ ಒಂದು ಸಂಚಲನ
ನಾ ಬರೆಯದ ಕವಿತೆಗಳ… ನೀನೇ ಒಂದು ಸಂಕಲನ
ನಿಂಗೆ ಎಲ್ಲಾ ಅರ್ಥ ಆಗೋದು ಲೇಟು. ಮೆಸ್ಸೇಜಿಗೆ ಉತ್ತರ ಕೊಡುವುದೂ ಅದೆಷ್ಟು ತಡ. ತುಂಬಾ ಸಲ ನಿನ್ನ ಮೆಸ್ಸೇಜಿನ ಬಾಕ್ಸ್ ನ್ನು ತೆರೆದೇ ಇಟ್ಟು ಹಸಿದ ಮನ ವೀಣಾ ಸ್ಟೋರ್ಸ್ ಮುಂದೆ ಇಡ್ಲಿಗಾಗಿ ಕಾಯುತ್ತಿರುವಂತೆ ನಿನ್ನ ಮೆಸ್ಸೇಜಿಗಾಗಿ ಕಾಯುತ್ತಿರುತ್ತೇನೆ. ಇದೀಗ ಟಣ್ ಅನ್ನುವ ಸದ್ದಿನೊಂದಿಗೆ ನಿನ್ನ ಉತ್ತರ ಬರುತ್ತದೆ ಭರವಸೆಯ ಆಶ್ವಾಸನೆಯೊಂದಿಗೆ ಅದೆಷ್ಟು ಕ್ಷಣಗಳಿಗೆ ನಾನು ಮೋಸ ಮಾಡಿಲ್ಲ? ನನ್ನ ಕಂಗಳ ಬೇಡಿಕೆ ನಿಂಗರ್ಥ ಆಗಿದ್ದಿದ್ದರೆ ಇಷ್ಟೊತ್ತಿಗೆ ಒಂದು ಸುಂದರ ಸ್ನೇಹವೊಂದು ರೂಪುಗೊಂಡಿರುತ್ತಿತ್ತು. ನಿನ್ನ ಉತ್ತರ ಮತ್ತು ನನ್ನ ಮರು ಉತ್ತರದ ನಡುವಿನ ಸಮಯದ ಲಯವೇ ಹೇಳುತ್ತದೆ; ಬಹುಷಃ ಬೆಳಗಾಗುತ್ತಲೇ ನಾನು ಗುಡ್ ಮಾರ್ನಿಂಗ್ ಹೇಳುವುದು ನಿನ್ನ ಉತ್ತರದ ನಿರೀಕ್ಷೆಗೇ. ಪ್ರತೀ ಕ್ಷಣದ ರುಚಿ ನೋಡಿ ನಿನಗಾಗಿ ಕಾಯ್ದಿರಿಸುವ ಶಬರಿ ನಾನು, ಅಂತಲೇ ನನ್ನ ಬಗ್ಗೆ ನನಗಿರುವ ಗುಮಾನಿ. ಇಷ್ಟಕ್ಕೂ ನನಗೆ ಬೇಕಿರುವುದು ಒಂದು ಸುಂದರ ಸ್ನೇಹ. ನಿನ್ನನ್ನು ಅರಿಯುವ ಸುಖ. ಬದುಕು ಪೂರ್ತಿ ಖುಷಿಯಿಂದ ಕಳೆಯಲು- ನಿನ್ನ ಜೊತೆ ಕಳೆದ ಸಮಯಗಳ ಒಂದು ಜೋಳಿಗೆಯಷ್ಟು ನೆನಪುಗಳು. ಮತ್ತು ಕೊಂಚೇ ಕೊಂಚ ಪ್ರೀತಿ.
ಜೊತೆಗೆ ನೀನು ಸದಾ ಖುಷಿಯಾಗಿರುವುದು.
ಇಷ್ಟು ಪುಟ್ಟ ಬೇಡಿಕೆಯಿಟ್ಟುಕೊಂಡು ನಿನ್ನ ಉತ್ತರಕ್ಕಾಗಿ ಪ್ರತಿದಿನ ಕಾಯುತ್ತಿರುತ್ತೇನೆ; ಎಂದಿನಂತೆ.
ಇದೇ ನನ್ನ ನಾಳೆಗಳನ್ನು ರುಚಿಕಟ್ಟಾಗಿರಿಸುತ್ತಿದೆ. ಇದೇ ಭರವಸೆಯ ನೊಗ ಹೊತ್ತು ದಿನದ ಹೊಲವನ್ನು ಉಳುತ್ತಿರುತ್ತೇನೆ.
– ನಿನ್ನ ಕಣ್ಣುಗಳ ಫ್ಯಾನ್